ಮಹಾರಾಷ್ಟ್ರ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಮಹಾರಾಷ್ಟ್ರ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಮಾರ್ಚ್ 25, 2009

’ಕೈ’-’ಲಾಗ’-ದವರು

ಇವತ್ತಿನ ಪತ್ರಿಕೆಗಳನ್ನು ನೋಡಿದಿರಾ?
’ಕೈ’ ಲಾಗದ ಇಬ್ಬರು ವೃದ್ಧರು ಪರಸ್ಪರ ಅದೇನನ್ನೋ ಹೇಳಲು-ಕೇಳಲು ಒದ್ದಾಡುತ್ತಿರುವ ಫೋಟೋ ಗಮನಿಸಿದಿರಾ?

ಗಾಲಿ ಕುರ್ಚಿ ಬಿಟ್ಟು ಎದ್ದೇಳಲಾರದ ಅರ್ಜುನಸಿಂಗರು, ’ಕಿವಿ ಸ್ವಲ್ಪ ದೂರ’ (pun intended) ಇರುವ ಪ್ರಣವ ಮುಖರ್ಜಿಗೆ ಏನನ್ನೋ ಹೇಳಲು ತಮ್ಮ ಮುಖ ಮುಂದೆಚಾಚಿ ಒದ್ದಾಡುತ್ತಿರುವರು; ಅದನ್ನು ಕೇಳಿಸಿಕೊಳ್ಳಲು ಪ್ರಣವರು ತಮ್ಮ ಕಿವಿಗೆ ಕೈ ಅಡ್ಡ ಇಟ್ಟುಕೊಂಡು ಒದ್ದಾಡುತ್ತಿರುವರು!
ಹಿಂದೆ ಕುಳಿತ ನಮ್ಮ ಬಿ.ಕೆ.ಹರಿಪ್ರಸಾದರು ಇದನ್ನು ನೋಡಿ ಮುಖ ಎತ್ತಿ ನಗುತ್ತಿರುವರು!

ಇವತ್ತಿನ ಪತ್ರಿಕೆಗಳಲ್ಲೇ ಇನ್ನೊಂದು ಫೋಟೋ ಗಮನಿಸಿದಿರಾ?

ವಯಸ್ಸಾಗಿದ್ದರೂ ತಾನು ನಡೆದಾಡಬಲ್ಲೆ, ತನಗೆ ಚುನಾವಣಾ ಟಿಕೆಟ್ ಬೇಕು, ಎಂದು ಹೇಳಿ, ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಯ ಮನೆಯವರೆಗೆ ಪಾದಯಾತ್ರೆಗೈದು ತೋರಿಸಲು ಬಿಹಾರಕ್ಕೆ ಬಂದಿಳಿದ ಜಾರ್ಜ್‌ ಫರ್ನಾಂಡಿಸರು ವಿಮಾನ ನಿಲ್ದಾಣದಲ್ಲಿ ದಿಗ್ವಿಜಯಸಿಂಗರ ನೆರವಿನಿಂದ ನಡೆಯುತ್ತಿರುವರು! ನಡೆದಾಡಲೂ ಕಷ್ಟಪಡುವ ಇವರು ತಾನು ಸುದೃಢವಾಗಿರುವೆನೆಂದು ತೋರಿಸಿಕೊಳ್ಳಲು ’ಲಾಗ’ಹಾಕುತ್ತಿರುವರು!

ಇವತ್ತಿನ ಪತ್ರಿಕೆಗಳಲ್ಲೇ ಇನ್ನೂ ಒಂದು ಫೋಟೋ ನೋಡಿದಿರಾ?

83ರ ಹರಯದ ’ಎವರ್ ಗ್ರೀನ್ ಹೀರೊ’ ದೇವಾನಂದ್ ’ಚಾರ್ಜ್‌‌ಶೀಟ್’ ಸಲ್ಲಿಸುತ್ತಿರುವ ಫೋಟೋ! ಅರ್ಥಾತ್ ತನ್ನ ಮುಂಬರುವ ಚಿತ್ರ ’ಚಾರ್ಜ್‌‌ಶೀಟ್’ ಬಗ್ಗೆ ಮಾತನಾಡುತ್ತಿರುವ ಫೋಟೋ.

ಕಾರುಬಾರು ನೋಡಿದರೆ ಪ್ರಣವ್, ದೇವಾನಂದ್ ಓಕೆ; ಅರ್ಜುನ್, ಜಾರ್ಜ್‌ (ಇನ್ನೂ) ಯಾಕೆ?
ವಾಜಪೇಯಿಯಹಾಗೆ ಡೀಸೆಂಟಾಗಿ ಮನೇರಿಲೋಕಾಗೋಲ್ವೆ?
ಈ ಅ(ರ್ಜುನ್)ಜಾ(ರ್ಜ್‌)ರಿಷ್ಟರ ಸಾಲಿಗೆ ಮಹಾ-ದ್ರಾವಿಡ ವೃದ್ಧ (ಕರುಣಾ)ನಿಧಿಯನ್ನೂ ಮತ್ತು ಮಹಾ-ರಾಷ್ಟ್ರೀಯ(ವಾದಿ) ಬಾಳ್ ಠಾಕ್ರೆಯನ್ನೂ ಸೇರಿಸಬಹುದಷ್ಟೆ.
(ನಡೆಯೋದು ನೋಡಿದರೆ, ’ರಾಮ)ರಾಮಾ!’ಈಶ್ವರ ಠಾಕೂರ್ ಏನು ಕಮ್ಮಿಯೇ?
ರಾಮೇಶ್ವರ ಠಾ’ಕೂರ’ರಿಗೆ ಕೂರಲೂ ಕಷ್ಟ, ಏಳಲೂ ಕಷ್ಟ!
ನಮ್ಮ ದೇವೇಗೌಡರೂ ರೇಸ್‌ನಲ್ಲಿದ್ದಾರಾದರೂ ಸಂಪೂರ್ಣ ಅರ್ಹತೆ ಇನ್ನೂ ಪಡೆದಿಲ್ಲ; ಪಡೆಯುವುದೂ ಬೇಡವೆಂಬುದು ನಮ್ಮ ಹಾರೈಕೆ. (ಏಕೆಂದರೆ, ಇದು ಓಡಲಾರದವರ-ಓಡಾಡಲಾರದವರ ರೇಸ್ ತಾನೆ.)
ರೇಸಿಗರ ಪಟ್ಟಿ ಇನ್ನೂ ಉದ್ದವಿದೆ.

ಹೇಸಿಗೆ ಹುಟ್ಟುವಷ್ಟು ಒದ್ದಾಟ ಮಾಡಿಕೊಂಡು ಅಧಿಕಾರದ ರೇಸಿಗೆ ಇಳಿಯುವ ಈ ’ಕೈ’-’ಲಾಗ’ದ ವಯೋವೃದ್ಧರನ್ನು ಕಂಡು ಅಯ್ಯೋ ಅನ್ನಬೇಕೆನ್ನಿಸುತ್ತದೆ. ಆದರೆ ನಾನು ಅನ್ನುವುದಿಲ್ಲ. ಏಕೆಂದರೆ, ಅಧಿಕಾರದ ಗದ್ದುಗೆ ಏರಿ(!) ಇವರು ಸುದ್ದಿಯಲ್ಲಿದ್ದುಕೊಂಡು ಆರಾಮಾಗಿ ನಿದ್ದೆಹೋಗುತ್ತಾರೆ; ಇಂಥವರ ಆಳ್ವಿಕೆಯಿಂದ ಅನುಭವಿಸುವುದು ಪ್ರಜೆಗಳಾದ ನಾವು.

ನಮ್ಮ ಬಗ್ಗೆಯೂ ಯಾರೂ ಅಯ್ಯೋ ಅನ್ನಬೇಕಾದ್ದಿಲ್ಲ. ಏಕೆಂದರೆ, ಇಂಥವರನ್ನು ಆರಿಸಿ ಕಳಿಸುವುದೇ/ಇಂಥವರ ಅಧಿಕಾರ ಚಲಾವಣೆಗೆ ಅನುವು ಮಾಡಿಕೊಡುವುದೇ ನಾವು ತಾನೆ?
ಆದ್ದರಿಂದ, ಮಾಡಿದ್ದುಣ್ಣೋ ಮಹರಾಯ!